bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Peter 2
1 Peter 2
Kannada Bible (KNCL) BSI 2016
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 3 →
1
ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.
2
ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.
3
“ಪ್ರಭು ಎಂಥಾ ದಯಾಳು ಎಂಬುದನ್ನು ನೀವು ಅನುಭವದಿಂದ ಅರಿತುಕೊಂಡಿದ್ದೀರಿ.”
4
ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.
5
ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.
6
ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ: “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”
7
ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.”
8
“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.
9
ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.
10
ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.
11
ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
12
ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.
13
ಎಲ್ಲ ಮಾನವ ಅಧಿಕಾರಿಗಳಿಗೂ ಪ್ರಭುವಿನ ನಿಮಿತ್ತ ಅಧೀನರಾಗಿರಿ. ಸಕಲ ಅಧಿಕಾರವನ್ನು ಪಡೆದಿರುವ ದೇಶಾಧಿಕಾರಿಗೆ ಅಧೀನರಾಗಿ ನಡೆಯಿರಿ.
14
ದುಷ್ಟರನ್ನು ಶಿಕ್ಷಿಸುವುದಕ್ಕೂ ಶಿಷ್ಟರನ್ನು ಪ್ರಶಂಸಿಸುವುದಕ್ಕೂ ಆತನಿಂದ ನೇಮಿತವಾಗಿರುವ ರಾಜ್ಯಪಾಲರಿಗೂ ಅಧೀನರಾಗಿ ಬಾಳಿರಿ.
15
ನಿಮ್ಮ ಒಳ್ಳೆಯ ನಡತೆಯಿಂದ, ಅರಿವಿಲ್ಲದೆ ಮಾತನಾಡುವ ಮೂಢಜನರ ಬಾಯನ್ನು ಮುಚ್ಚಿಸಬೇಕೆಂಬುದೇ ದೇವರ ಇಚ್ಛೆ.
16
ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.
17
ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.
18
ಕೆಲಸಗಾರರೇ, ನಿಮ್ಮ ಮೇಲಿನ ಅಧಿಕಾರಿಗಳಿಗೆ ಅಧೀನರಾಗಿರಿ. ಅವರಿಗೆ ಪೂರ್ಣಮರ್ಯಾದೆಯನ್ನು ತೋರಿಸಿರಿ. ದಯಾವಂತರೂ ಹಿತಚಿಂತಕರೂ ಆಗಿರುವ ಅಧಿಕಾರಿಗಳಿಗೆ ಮಾತ್ರವಲ್ಲ, ಕಠಿಣವಾಗಿ ವರ್ತಿಸುವವರಿಗೂ ವಿಧೇಯರಾಗಿರಿ.
19
ಯಾವನಾದರೂ ಅನ್ಯಾಯವಾಗಿ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗಿ ಬಂದಾಗ ಅದನ್ನು ದೇವರ ಹೆಸರಿನಲ್ಲಿ ಸಹಿಸಿಕೊಂಡರೆ ಅವನು ಮೆಚ್ಚುಗೆಯನ್ನು ಗಳಿಸುತ್ತಾನೆ.
20
ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.
21
ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.
22
ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.
23
ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.
24
ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.
25
ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 3 →
All chapters:
1
2
3
4
5