bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Joshua 24
Joshua 24
Kannada Bible (KNCL) BSI 2016
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
1
ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.
2
ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
3
ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು, ಕಾನಾನ್ ನಾಡಿನಲ್ಲೆಲ್ಲಾ ಸಂಚಾರ ಮಾಡಿಸಿದೆ. ಇಸಾಕನೆಂಬ ಮಗನನ್ನು ಕೊಟ್ಟು, ಅವನ ಸಂತಾನವನ್ನು ಹೆಚ್ಚಿಸಿದೆ.
4
ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.
5
ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ.
6
ನಿಮ್ಮ ಪೂರ್ವಜರು ಈಜಿಪ್ಟಿನಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತ ಇರುವಾಗ ಈಜಿಪ್ಟಿನವರು ರಥಾಶ್ವಬಲಗಳ ಸಹಿತ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿ ಬಂದರು.
7
ಆಗ ನಿಮ್ಮ ಪೂರ್ವಜರು ನನಗೆ ಮೊರೆಯಿಟ್ಟರು. ನಾನು ಅವರಿಗೂ ಈಜಿಪ್ಟಿನವರಿಗೂ ಮಧ್ಯೆ ಕಾರ್ಗತ್ತಲೆಯನ್ನು ಉಂಟುಮಾಡಿದೆ. ಇದಲ್ಲದೆ ಈಜಿಪ್ಟಿನವರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆ. ನಾನು ಈಜಿಪ್ಟಿನಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವೇ ಸಾಕ್ಷಿಗಳು.
8
‘ನೀವು ದೀರ್ಘಕಾಲ ಮರುಭೂಮಿಯಲ್ಲಿದ್ದಿರಿ. ಅನಂತರ ನಿಮ್ಮನ್ನು ಜೋರ್ಡನಿನ ಆಚೆ ಅಮೋರಿಯರ ನಾಡಿಗೆ ಕರೆತಂದೆ. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈವಶಮಾಡಿದೆ. ನೀವು ಅವರ ನಾಡನ್ನು ಸ್ವತಂತ್ರಿಸಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ನಾಶಮಾಡಿದೆ.
9
ಆಮೇಲೆ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಯೇಲರಾದ ನಿಮ್ಮ ವಿರುದ್ಧ ಯುದ್ಧಮಾಡಲು ಎದ್ದ. ನಿಮ್ಮನ್ನು ಶಪಿಸಲು ಬೆಯೋರನ ಮಗ ಬಿಳಾಮನಿಗೆ ಕರೆ ಕಳುಹಿಸಿದ.
10
ಆದರೆ ನಾನು ಆ ಬಿಳಾಮನಿಗೆ ಸಮ್ಮತಿ ಕೊಡಲಿಲ್ಲವಾದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆ.
11
ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.
12
ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ.
13
ನೀವು ಕೃಷಿಮಾಡದ, ಬೆಳೆ ತುಂಬಿದ ಭೂಮಿಯನ್ನು ನಿಮಗೆ ಕೊಟ್ಟೆ, ನೀವು ಕಟ್ಟದ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿ ಹಾಗೂ ಎಣ್ಣೆಮರಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ’.
14
“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.
15
ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.
16
ಅದಕ್ಕೆ ಜನರು, “ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ.
17
ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ.
18
ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.
19
ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.
20
ನೀವು ಅವರನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವರು,” ಎಂದನು.
21
ಜನರು ಯೆಹೋಶುವನಿಗೆ, “ಇಲ್ಲ, ನಾವು ಸರ್ವೇಶ್ವರಸ್ವಾಮಿಗೇ ಸೇವೆಸಲ್ಲಿಸುತ್ತೇವೆ,” ಎಂದರು.
22
ಯೆಹೋಶುವ ಅವರಿಗೆ, “ನೀವು ಸರ್ವೇಶ್ವರನಿಗೇ ಸೇವೆಸಲ್ಲಿಸುವುದನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು,” ಎನ್ನಲು ಅವರು, “ಹೌದು, ನಾವೇ ಸಾಕ್ಷಿಗಳು,” ಎಂದು ಉತ್ತರಕೊಟ್ಟರು.
23
ಆಗ ಯೆಹೋಶುವ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೊರೆದುಬಿಟ್ಟು ಇಸ್ರಯೇಲಿನ ದೇವರಾದ ಸರ್ವೇಶ್ವರನ ಕಡೆಗೆ ನಿಮ್ಮ ಹೃನ್ಮನಗಳನ್ನು ತಿರುಗಿಸಿಕೊಳ್ಳಿ,” ಎಂದನು.
24
ಅದಕ್ಕೆ ಜನರು, “ನಮ್ಮ ದೇವರಾದ ಸರ್ವೇಶ್ವರನಿಗೇ ಸೇವೆಸಲ್ಲಿಸುತ್ತೇವೆ. ಅವರ ಮಾತನ್ನೇ ಕೇಳುತ್ತೇವೆ,” ಎಂದರು.
25
ಹೀಗೆ ಯೆಹೋಶುವ ಶೆಕೆಮಿನಲ್ಲಿ ಇಸ್ರಯೇಲರೊಡನೆ ಒಪ್ಪಂದ ಮಾಡಿಕೊಂಡು ಅವರಿಗೆ ವಿಧಿನಿಯಮಗಳನ್ನು ನೇಮಿಸಿದನು.
26
ಇದು ಮಾತ್ರವಲ್ಲ, ಈ ಎಲ್ಲಾ ಮಾತುಕತೆಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದಿಟ್ಟನು. ಒಂದು ದೊಡ್ಡ ಕಲ್ಲನ್ನು ಸರ್ವೇಶ್ವರನ ಆಲಯದ ಹತ್ತಿರದಲ್ಲೇ ಇದ್ದ ಓಕ್ ವೃಕ್ಷದ ಅಡಿಯಲ್ಲಿ ನಿಲ್ಲಿಸಿದನು.
27
ಬಳಿಕ ಎಲ್ಲಾ ಜನರಿಗೆ, “ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ.
28
ಆದ್ದರಿಂದ ನೀವು ನಿಮ್ಮ ದೇವರಾದ ಅವರನ್ನು ಅಲ್ಲಗಳೆದದ್ದೇ ಆದರೆ ಈ ಕಲ್ಲೇ ನಿಮಗೆ ಸಾಕ್ಷಿಯಾಗಿರುವುದು,” ಎಂದು ಹೇಳಿ ಆ ಜನರನ್ನು ಅವರವರ ಸೊತ್ತಿದ್ದಲ್ಲಿಗೆ ಕಳುಹಿಸಿಬಿಟ್ಟನು.
29
ಇದಾದ ಮೇಲೆ ಸರ್ವೇಶ್ವರನ ದಾಸನಾದ ನೂನನ ಮಗ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದ.
30
ಆತನ ಕಳೇಬರವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಗಾಷ್ ಬೆಟ್ಟದ ಉತ್ತರ ದಿಕ್ಕಿನಲ್ಲಿರುವ ತಿಮ್ನತ್ ಸೆರಹ ಎಂಬ ಅವರ ಸ್ವಂತ ಭೂಮಿಯಲ್ಲಿ ಸಮಾಧಿಮಾಡಿದರು.
31
ಯೆಹೋಶುವನ ದಿನಗಳಲ್ಲೂ ಅವನ ಕಾಲದಿಂದ ಇನ್ನೂ ಜೀವಿಸುತ್ತಿದ್ದ ಹಿರಿಯರ ದಿನಗಳಲ್ಲೂ ಇಸ್ರಯೇಲರು, ಸರ್ವೇಶ್ವರ ಇಸ್ರಯೇಲರ ಹಿತಕ್ಕಾಗಿ ನಡೆಸಿದ ಅದ್ಭುತಕಾರ್ಯಗಳಿಗೆ ಸಾಕ್ಷಿಗಳಾಗಿದ್ದರು.
32
ಇಸ್ರಯೇಲರು ಈಜಿಪ್ಟಿನಿಂದ ತಂದ ಜೋಸೆಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯ ಕೊಟ್ಟು ಕೊಂಡುಕೊಂಡಿದ್ದನು. ಅದು ಜೋಸೆಫ್ಯರ ಸೊತ್ತಾಗಿತ್ತು.
33
ಆರೋನನ ಮಗ ಎಲ್ಲಾಜಾರನೂ ಮರಣಹೊಂದಿದನು. ಅವನ ಶವವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಅವನ ಮಗ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24