bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Luke 7
Luke 7
Kannada Bible (KNCL) BSI 2016
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 8 →
1
ಜನರಿಗೆ ಮನಮುಟ್ಟುವಂತೆ ಬೋಧನೆಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು.
2
ಅಲ್ಲಿ ರೋಮ್ ಶತಾಧಿಪತಿಯೊಬ್ಬನ ನೆಚ್ಚಿನ ಸೇವಕನು ಕಾಯಿಲೆಯಿಂದ ಸಾಯುವುದರಲ್ಲಿದ್ದನು.
3
ಶತಾಧಿಪತಿ ಯೇಸುವಿನ ವಿಷಯವನ್ನು ಕೇಳಿ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕನನ್ನು ಗುಣಪಡಿಸಲು ಬರಬೇಕೆಂದು ಮನವಿಮಾಡಿಕೊಂಡನು.
4
ಅವರು ಯೇಸುವಿನ ಬಳಿಗೆ ಬಂದು, “ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಅರ್ಹನು;
5
ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ,” ಎಂದು ಬಹಳವಾಗಿ ವಿನಂತಿಸಿದರು.
6
ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ, ಶತಾಧಿಪತಿ ತನ್ನ ಗೆಳೆಯರ ಮುಖಾಂತರ, “ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ.
7
ನಾನೇ ತಮ್ಮಲ್ಲಿಗೆ ಬರೋಣವೆಂದರೆ ಆ ಯೋಗ್ಯತೆಯೂ ನನಗಿಲ್ಲ. ತಾವು ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.
8
ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು ‘ಬಾ,’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ ‘ಹೋಗು,’ ಎಂದರೆ ಹೋಗುತ್ತಾನೆ. ಸೇವಕನಿಗೆ ‘ಇಂಥದ್ದನ್ನು ಮಾಡು,’ ಎಂದರೆ ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.
9
ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿನೋಡಿ, “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.
10
ಇತ್ತ ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಕಾಯಿಲೆಬಿದ್ದಿದ್ದ ಆ ಸೇವಕನು ಸ್ವಸ್ಥನಾಗಿದ್ದುದನ್ನು ಕಂಡರು.
11
ಇದಾದನಂತರ ಯೇಸುಸ್ವಾಮಿ ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು.
12
ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು.
13
ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,
14
ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು.
15
ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು.
16
ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.
17
ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.
18
ನಡೆದ ಈ ವಿಷಯವೆಲ್ಲ ಯೊವಾನ್ನನಿಗೆ ತನ್ನ ಶಿಷ್ಯರ ಮುಖಾಂತರ ತಿಳಿಯಿತು.
19
ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.
20
ಆ ಶಿಷ್ಯರು ಯೇಸುವಿನ ಬಳಿಗೆ ಬಂದು, “ಬರಬೇಕಾದವರು ನೀವೋ ಅಥವಾ ನಾವು ಬೇರೊಬ್ಬರನ್ನು ಎದುರು ನೋಡಬೇಕೊ ಎಂದು ವಿಚಾರಿಸಲು ಸ್ನಾನಿಕ ಯೊವಾನ್ನ ನಮ್ಮನ್ನು ತಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದರು.
21
ಅದೇ ಸಮಯದಲ್ಲಿ ಯೇಸು ರೋಗರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವ ಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವುಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು.
22
ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.
23
ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು.
24
ಬಂದಿದ್ದ ಶಿಷ್ಯರು ಹಿಂದಕ್ಕೆ ಹೋದ ಬಳಿಕ, ಯೇಸು ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಹೀಗೆಂದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೇ?
25
ಇಲ್ಲವಾದರೆ ಮತ್ತೇನನ್ನು ನೋಡಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿರುವ ವ್ಯಕ್ತಿಯನ್ನೇ? ಅಂಥ ಶೃಂಗಾರವಾದ ಉಡುಗೆತೊಡುಗೆಯನ್ನು ಧರಿಸಿ, ಭೋಗಜೀವನ ನಡೆಸುವವರು ಅರಮನೆಗಳಲ್ಲಿರುತ್ತಾರಷ್ಟೆ!
26
ಹಾಗಾದರೆ ನೀವು ಇನ್ನೇನನ್ನು ನೋಡಲು ಹೋದಿರಿ? ಪ್ರವಾದಿಯನ್ನೇ? ಹೌದು, ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ, ಎಂಬುದು ನಿಜ.
27
“ ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು,’ - ಎಂದು ಪವಿತ್ರಗ್ರಂಥದಲ್ಲಿ ಪ್ರಸ್ತಾಪಿಸಿರುವುದು ಈ ಯೊವಾನ್ನನನ್ನು ಕುರಿತೇ.
28
ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.
29
ಯೊವಾನ್ನನ ಉಪದೇಶವನ್ನು ಜನಸಾಮಾನ್ಯರೆಲ್ಲರೂ ಕೇಳಿದರು. ಅವರು, ವಿಶೇಷವಾಗಿ ಸುಂಕದವರು, ದೈವಯೋಜನೆಗೆ ತಲೆಬಾಗಿ ಆತನಿಂದ ಸ್ನಾನದೀಕ್ಷೆಯನ್ನು ಪಡೆದರು.
30
ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.
31
ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ?
32
ಪೇಟೆಬೀದಿಯಲ್ಲಿ ಕುಳಿತು, ‘ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ.’ ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ.
33
ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳಿದಿರಿ;
34
ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.
35
ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ,” ಎಂದರು.
36
ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.
37
ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು.
38
ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನುಹಚ್ಚಿದಳು.
39
ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.
40
ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು.
41
ಆಗ ಯೇಸು, “ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು.
42
ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.
43
ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.
44
ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.
45
ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುತ್ತಿಡುವುದನ್ನು ನಿಲ್ಲಿಸಿಲ್ಲ;
46
ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು.
47
ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.
48
ಅನಂತರ ಯೇಸು ಆ ಮಹಿಳೆಗೆ: “ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.
49
ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, “ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು?” ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು.
50
ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 8 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24