bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Judges 4
Judges 4
Kannada (ERV) 1997 (ಪರಿಶುದ್ದ ಬೈಬಲ್)
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 5 →
1
ಏಹೂದನು ಮರಣಹೊಂದಿದ ಮೇಲೆ ಇಸ್ರೇಲರು ಮತ್ತೆ ಯೆಹೋವನ ವಿರೋಧವಾಗಿ ಪಾಪ ಮಾಡಿದರು.
2
ಆದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಇಸ್ರೇಲರನ್ನು ಸೋಲಿಸುವಂತೆ ಯೆಹೋವನು ಅವಕಾಶ ಮಾಡಿದನು. ಯಾಬೀನನು ಹಾಚೋರ್ ಎಂಬ ನಗರದಲ್ಲಿ ಆಳುತ್ತಿದ್ದನು. ಸೀಸೆರ ಎಂಬವನು ಅವನ ಸೇನಾಧಿಪತಿಯಾಗಿದ್ದನು. ಸೀಸೆರನು ಹರೋಷೆತ್ ಹಗ್ಗೋಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದನು.
3
ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.
4
ಆಗ ದೆಬೋರಳೆಂಬ ಒಬ್ಬ ಪ್ರವಾದಿನಿ ಇದ್ದಳು. ಅವಳು ಲಪ್ಪೀದೋತ್ ಎಂಬವನ ಪತ್ನಿಯಾಗಿದ್ದಳು. ಅವಳು ಆಗ ಇಸ್ರೇಲಿನ ನ್ಯಾಯಾಧೀಶೆಯಾಗಿದ್ದಳು.
5
ಒಂದು ದಿನ, ಆಕೆ ದೆಬೋರಳ ಖರ್ಜೂರದ ಮರವೆಂದು ಪ್ರಸಿದ್ಧವಾದ ಮರದ ಕೆಳಗೆ ಕುಳಿತಿದ್ದಳು. ಆಗ ಇಸ್ರೇಲಿನ ಜನರು ಆಕೆಯ ಹತ್ತಿರ ಬಂದು, “ಸೀಸೆರನ ಬಗ್ಗೆ ಏನು ಮಾಡಬೇಕು?” ಎಂದು ಕೇಳಿದರು. ದೆಬೋರಳ ಖರ್ಜೂರಮರವು ಎಫ್ರಾಯೀಮ್ ಬೆಟ್ಟಪ್ರದೇಶದ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಇದೆ.
6
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.
7
ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ’ ಎಂದು ಹೇಳಿದ್ದಾನೆ” ಎಂದಳು.
8
ಆಗ ಬಾರಾಕನು ದೆಬೋರಳಿಗೆ, “ನೀನು ನನ್ನೊಂದಿಗೆ ಬಂದರೆ ನಾನು ಹೋಗುವೆನು; ನೀನು ನನ್ನೊಂದಿಗೆ ಬರದಿದ್ದರೆ ನಾನು ಹೋಗುವುದಿಲ್ಲ” ಎಂದನು.
9
ಅದಕ್ಕೆ ದೆಬೋರಳು, “ನಿಸ್ಸಂದೇಹವಾಗಿ ನಾನು ನಿನ್ನೊಂದಿಗೆ ಬರುತ್ತೇನೆ. ಆದರೆ ನಿನ್ನ ಈ ಮನೋಭಾವದಿಂದಾಗಿ ಸೀಸೆರನನ್ನು ಸೋಲಿಸಿದ ಗೌರವ ನಿನಗೆ ಸಲ್ಲುವುದಿಲ್ಲ. ಒಬ್ಬ ಹೆಂಗಸು ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ” ಎಂದು ಉತ್ತರಿಸಿದಳು. ದೆಬೋರಳು ಬಾರಾಕನ ಸಂಗಡ ಕೆದೆಷ್ ನಗರಕ್ಕೆ ಹೋದಳು.
10
ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಆ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.
11
ಹೆಬೆರನೆಂಬ ಒಬ್ಬ ಮನುಷ್ಯನಿದ್ದನು. ಅವನು ಕೇನ್ಯರ ಕುಲದವನಾಗಿದ್ದನು. ಅವನು ಉಳಿದ ಕೇನ್ಯರನ್ನು ಬಿಟ್ಟು ಚಾನನ್ನೀಮ್ ಎಂಬ ಊರಲ್ಲಿ ಓಕ್ ವೃಕ್ಷದ ಬಳಿ ಮನೆ ಮಾಡಿಕೊಂಡಿದ್ದನು. (ಕೇನ್ಯರು ಹೋಬಾಬನ ಸಂತತಿಯವರಾಗಿದ್ದರು. ಹೋಬಾಬನು ಮೋಶೆಯ ಮಾವನಾಗಿದ್ದನು.) ಚಾನನ್ನೀಮ್ ಕೆದೆಷ್ ನಗರದ ಸಮೀಪದಲ್ಲಿತ್ತು.
12
ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟಕ್ಕೆ ಬಂದಿದ್ದಾನೆಂಬ ಸಮಾಚಾರ ಸೀಸೆರನಿಗೆ ತಿಳಿಯಿತು.
13
ಸೀಸೆರನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನು ಒಟ್ಟುಗೂಡಿಸಿದನು. ಸೀಸೆರನು ತನ್ನ ಎಲ್ಲಾ ಜನರನ್ನು ತನ್ನ ಜೊತೆ ಸೇರಿಸಿಕೊಂಡನು. ಅವರು ಹರೋಷೆತ್ ಹೆಗ್ಗೋಯಿಮ್ನಿಂದ ಕೀಷೋನ್ ನದಿಗೆ ನಡೆದರು.
14
ಆಗ ದೆಬೋರಳು ಬಾರಾಕನಿಗೆ, “ಈ ದಿನ ಯೆಹೋವನು ಸೀಸೆರನನ್ನು ಸೋಲಿಸಲು ನಿನಗೆ ಸಹಾಯ ಮಾಡುತ್ತಾನೆ. ಯೆಹೋವನು ನಿನಗಾಗಿ ದಾರಿಯನ್ನು ಸುಗಮಗೊಳಿಸಿದ್ದಾನೆಂಬುದು ನಿನಗೆ ಖಚಿತವಾಗಿ ಗೊತ್ತಿದೆ” ಎಂದು ಹೇಳಿದಳು. ಆದ್ದರಿಂದ ಬಾರಾಕನು ಹತ್ತು ಸಾವಿರ ಜನರೊಂದಿಗೆ ತಾಬೋರ್ ಬೆಟ್ಟದಿಂದ ಇಳಿದನು.
15
ಬಾರಾಕ ಮತ್ತು ಅವನ ಜನರು ಸೀಸೆರನ ಮೇಲೆ ಧಾಳಿ ಮಾಡಿದರು. ಯೆಹೋವನು ಸೀಸೆರನಲ್ಲಿ ಮತ್ತು ಅವನ ಸೈನ್ಯದಲ್ಲಿ ಮತ್ತು ಅವನ ರಥಗಳಲ್ಲಿ ಗಲಿಬಿಲಿ ಉಂಟುಮಾಡಿದನು. ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. ಬಾರಾಕ ಮತ್ತು ಅವನ ಸೈನಿಕರು ಸೀಸೆರನ ಸೈನ್ಯವನ್ನು ಸೋಲಿಸಿದರು. ಆದರೆ ಸೀಸೆರನು ತನ್ನ ರಥವನ್ನು ಬಿಟ್ಟು ಓಡಿಹೋದನು.
16
ಬಾರಾಕ ಮತ್ತು ಅವನ ಜನರು ಸೀಸೆರನ ಸೈನ್ಯವನ್ನು ಮತ್ತು ರಥಗಳನ್ನು ಹರೋಷೆತ್ ಹಗ್ಗೋಯಿಮ್ನವರೆಗೆ ಬೆನ್ನಟ್ಟಿದರು. ಬಾರಾಕ ಮತ್ತು ಅವನ ಜನರು ಖಡ್ಗದಿಂದ ಸೀಸೆರನ ಜನರನ್ನು ಕೊಂದುಹಾಕಿದರು. ಸೀಸೆರನ ಜನರಲ್ಲಿ ಒಬ್ಬನನ್ನೂ ಜೀವಂತವಾಗಿ ಬಿಡಲಿಲ್ಲ.
17
ಆದರೆ ಸೀಸೆರನು ಓಡಿಹೋದನು. ಅವನು ಯಾಯೇಲ ಎಂಬ ಒಬ್ಬ ಮಹಿಳೆ ವಾಸವಾಗಿದ್ದ ಗುಡಾರಕ್ಕೆ ಬಂದನು. ಯಾಯೇಲಳು ಹೆಬೆರನ ಹೆಂಡತಿ. ಹೆಬೆರನು ಕೇನ್ಯನಾಗಿದ್ದನು. ಹಾಚೋರಿನ ಅರಸನಾದ ಯಾಬೀನ ಮತ್ತು ಕೇನ್ಯನಾದ ಹೆಬೆರನ ಕುಟುಂಬಗಳ ಮಧ್ಯೆ ಒಳ್ಳೆಯ ಸಮಾಧಾನವಿದ್ದಿತು. ಅದಕ್ಕಾಗಿ ಸೀಸೆರನು ಯಾಯೇಲಳ ಗುಡಾರಕ್ಕೆ ಓಡಿಹೋಗಿದ್ದನು.
18
ಸೀಸೆರನು ಬರುವುದನ್ನು ಯಾಯೇಲಳು ಕಂಡಳು. ಆದ್ದರಿಂದ ಅವನನ್ನು ಬರಮಾಡಿಕೊಳ್ಳಲು ಹೊರಗೆ ಬಂದಳು. ಯಾಯೇಲಳು ಸೀಸೆರನಿಗೆ, “ಸ್ವಾಮೀ, ನನ್ನ ಗುಡಾರದೊಳಗೆ ಬನ್ನಿ, ಭಯಪಡಬೇಡಿ” ಎಂದು ಕರೆದಳು. ಆದ್ದರಿಂದ ಸೀಸೆರನು ಗುಡಾರದೊಳಗೆ ಹೋದನು. ಅವಳು ಸೀಸೆರನ ಮೇಲೆ ಕಂಬಳಿಯನ್ನು ಹೊದಿಸಿದಳು.
19
ಸೀಸೆರನು ಯಾಯೇಲಳಿಗೆ, “ನನಗೆ ಬಾಯಾರಿಕೆಯಾಗಿದೆ. ದಯವಿಟ್ಟು ಕುಡಿಯಲು ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು. ಯಾಯೇಲಳ ಬಳಿ ಪ್ರಾಣಿಗಳ ಚರ್ಮದಿಂದ ಮಾಡಿದ ಒಂದು ಚೀಲವಿತ್ತು. ಆಕೆಯು ಅದರಲ್ಲಿ ಹಾಲಿಟ್ಟಿದ್ದಳು. ಯಾಯೇಲಳು ಸೀಸೆರನಿಗೆ ಒಂದು ಗುಟುಕು ಹಾಲನ್ನೇ ಕೊಟ್ಟಳು. ನಂತರ ಅವಳು ಸೀಸೆರನನ್ನು ಮುಚ್ಚಿಬಿಟ್ಟಳು.
20
ಆಗ ಸೀಸೆರನು ಯಾಯೇಲಳಿಗೆ, “ಹೋಗಿ ಗುಡಾರದ ಬಾಗಿಲಿನ ಹತ್ತಿರ ನಿಂತುಕೊಂಡಿರು. ಯಾರಾದರೂ ಬಂದು ‘ಗುಡಾರದಲ್ಲಿ ಯಾರಾದರೂ ಇದ್ದಾರೆಯೇ?’ ಎಂದು ಕೇಳಿದರೆ, ‘ಇಲ್ಲ’ ಎಂದು ಹೇಳು” ಎಂದನು.
21
ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.
22
ಅದೇ ಕ್ಷಣದಲ್ಲಿ ಬಾರಾಕನು ಯಾಯೇಲಳ ಗುಡಾರದ ಹತ್ತಿರಕ್ಕೆ ಬಂದನು. ಅವನನ್ನು ಬರಮಾಡಿಕೊಳ್ಳುವುದಕ್ಕಾಗಿ ಯಾಯೇಲಳು ಹೊರಗೆ ಬಂದು, “ಇಲ್ಲಿ ಒಳಗೆ ಬನ್ನಿ. ನಾನು, ನೀವು ಹುಡುಕುತ್ತಿರುವ ಮನುಷ್ಯನನ್ನು ತೋರಿಸುತ್ತೇನೆ” ಎಂದಳು. ಬಾರಾಕನು ಯಾಯೇಲಳ ಜೊತೆ ಗುಡಾರವನ್ನು ಪ್ರವೇಶಿಸಿದನು. ಅಲ್ಲಿ ಬಾರಾಕನು ಕಣತಲೆಯಲ್ಲಿ ಗೂಟವನ್ನು ಜಡಿಸಿಕೊಂಡು ನೆಲದ ಮೇಲೆ ಸತ್ತು ಬಿದ್ದಿದ್ದ ಸೀಸೆರನನ್ನು ಕಂಡನು.
23
ಆ ದಿನ ದೇವರು ಇಸ್ರೇಲರಿಗಾಗಿ ಕಾನಾನ್ಯ ರಾಜನಾದ ಯಾಬೀನನನ್ನು ಸೋಲಿಸಿದನು.
24
ಆತನು ಇಸ್ರೇಲರನ್ನು ಬಲಪಡಿಸಿದ್ದರಿಂದ ಅವರು ಕಾನಾನ್ಯ ಅರಸನಾದ ಯಾಬೀನನನ್ನು ಸಂಪೂರ್ಣವಾಗಿ ಸೋಲಿಸಿ ಅವನನ್ನು ನಿರ್ನಾಮ ಮಾಡಿದರು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 5 →
All chapters:
1
2
3
4
5
6
7
8
9
10
11
12
13
14
15
16
17
18
19
20
21